Animal Husbandry

ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ

03 October, 2020 10:21 AM IST By:

ರಾಜ್ಯದ ಎಲ್ಲ ಕೃಷಿ ವಿಜ್ಞಾನ ಕೇಂದ್ರಗಳು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 1.14 ಕೋಟಿ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಲಾಗುತ್ತಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಲಸಿಕೆ ಹಾಕಿಸುವುದರಿಂದ ಜಾನುವಾರುಗಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ರೋಗವನ್ನು ಹೆಚ್ಚು ಪ್ರಮಾಣದಲ್ಲಿ ನಿಯಂತ್ರಿಸಬಹುದು.ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ಜಿಲ್ಲಾ ಒಕ್ಕೂಟದ ವತಿಯಿಂದ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು. ಉಚಿತವಾಗಿ ಲಸಿಕೆ ನೀಡಲಾಗುವುದು.

ಈ ಲಸಿಕಾ ಕಾರ್ಯಕ್ರಮಕ್ಕಾಗಿ 6303 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ರಾಜ್ಯದ ಎಲ್ಲ ರೈತರು ಮತ್ತು ಪಶುಪಾಲಕರು ಜಾನುವಾರು ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ದಿನಾಂಕ 02.10.2020 ರಿಂದ 15-11-2020ರ ವರೆಗೆ ನಡೆಯುವ ಮೊದಲನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರವನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಕರ್ತವ್ಯ ಲೋಪ ಆಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತ ಬಾಂಧವರು ಹಾಗೂ ಜಾನುವಾರು ಮಾಲೀಕರು ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳಬೇಕು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಸಹ ಮತ್ತೊಮ್ಮೆ ತಮ್ಮ ಗ್ರಾಮಗಳಲ್ಲಿ ನಿಗದಿಯಾದ ದಿನಾಂಕದಂದು ಲಸಿಕೆ ಮಾಡಿಸಬೇಕು.

ಪಶುಪಾಲನಾ ಇಲಾಖೆಯ ಆರೋಗ್ಯ ಸಂರಕ್ಷಣೆಯ ಅತೀ ಮುಖ್ಯ ಕಾರ್ಯಕ್ರಮದ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತಗಳಲ್ಲಿ ಅಲ್ಲದೆ ನಗರಸಭೆ ಮತ್ತು ಪಟ್ಟಣ ಸಭೆ ಹಾಗೂ ಮಹಾನಗರ ಪಾಲಿಕೆಯಲ್ಲಿ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಲಸಿಕಾ ಅಭಿಯಾನ ಯಶಸ್ವಿಯಾಗಿ ಕಾರ್ಯಗತಗೊಳ್ಳಲು ಸಂಪೂರ್ಣ ಸಹಕಾರ ನೀಡಲು ಸಚಿವರು ತಿಳಿಸಿದ್ದಾರೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೋವಿಡ ನೆಪ ಒಡ್ಡಿ ಅಧಿಕಾರಿಗಳು ಕರ್ತವ್ಯದಿಂದ ಜಾರಿಕೊಳ್ಳಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದೆ. ಜಾನುವಾರು ಆರೋಗ್ಯದ ದೃಷ್ಟಿಯಿಂದ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಅತ್ಯಂತ ಮಹತ್ವದ ಲಸಿಕಾ ಕಾರ್ಯಕ್ರಮವಾಗಿದ್ದು, ಯಾವುದೇ ಜಿಲ್ಲೆಗಳಲ್ಲಿ ಇದಕ್ಕೆ ಹಿನ್ನಡೆಯಾದಲ್ಲಿ, ರೈತರ ಹಿತ ಕಾಪಾಡದ ಆಯಾ ಜಿಲ್ಲೆಯ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.