News

ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಉಂಟಾದ ಪ್ರವಾಹದಿಂದ ಉಂಟಾದ ಹಾನಿ ಪ್ರದೇಶಗಳ ಸಮೀಕ್ಷೆ ನಡೆಸಿ ಪರಿಹಾರ ಕಾರ್ಯ ಚುರುಕುಗೊಳಿಸಿರಿ : ಸಚಿವ ಮುರುಗೇಶ್

06 August, 2021 8:07 PM IST By:
crop loss

ಕಲಬುರಗಿ ಜಿಲ್ಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಉಂಟಾದ ಪ್ರವಾಹಕ್ಕೆ ತುತ್ತಾದ ಪ್ರದೇಶಗಳ ಹಾಗೂ ಬೆಳೆಗಳ ಸಮೀಕ್ಷೆ ಶೀಘ್ರವೇ ನಡೆಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಅತಿವೃಷ್ಟಿ ಹಾಗೂ ಕೋವಿಡ್ ನಿಯಂತ್ರಣ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಶುಕ್ರವಾರ ಬೆಂಗಳೂರಿನ ವಿಕಾಸಸೌಧದಿಂದ ವಿಡಿಯೋ ಕಾನ್ಫೆರೆನ್ಸ್ ನಡೆಸಿದ ಸಚಿವರು, ಕಲಬುರಗಿ ಮಿನಿವಿಧಾನಸೌಧದಲ್ಲಿ ಭಾಗವಹಿಸಿದ್ದ ಅಧಿಕಾರಿಗಳೊಂದಿಗೆ ಅತಿವೃಷ್ಟಿ, ಕೋವಿಡ್-19 ಮೂರನೇ ಅಲೆಯ ನಿಯಂತ್ರಣ ಇನ್ನಿತರ ವಿಷಯಗಳ ಕುರಿತು ಚರ್ಚಿಸಿ ಅವರು ಮಾತನಾಡಿದರು.

ಆಗಸ್ಟ್ ಅಂತ್ಯದೊಳಗೆ ಜಿಲ್ಲೆಯ ಎಲ್ಲಾ ಭಾಗದ ಹಾನಿಯಾದ ಪ್ರದೇಶಗಳ ಸಮೀಕ್ಷೆ ಮಾಡಿ ವರದಿ ಸಲ್ಲಿಸಲು ಸಚಿವರು ಸೂಚಿಸಿದರು. ಇದಕ್ಕೆ ಉತ್ತರಿಸಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಿತೇಂದ್ರನಾಥ ಸೂಗೂರು ಅವರು, ಮಳೆಗೆ ಜಿಲ್ಲೆಯಲ್ಲಿ ಒಟ್ಟು 27 ಸಾವಿರ ಹೆಕ್ಟೇರ್ ಪ್ರದೇಶ ಹಾನಿಯಾಗಿದ್ದು, ಅದರಲ್ಲಿ ತೊಗರಿ 15 ಸಾವಿರ ಹೆಕ್ಟೇರ್, ಹೆಸರು 7 ಸಾವಿರ ಹೆಕ್ಟೇರ್, ಉದ್ದು 2 ಸಾವಿರ ಹೆಕ್ಟೇರ್, ಸೋಯಾಬಿನ್ 103 ಹೆಕ್ಟೇರ್, ಹತ್ತಿ 1345 ಹೆಕ್ಟೇರ್ ಹಾಗೂ ಸೂರ್ಯಕಾಂತಿ 22 ಹೆಕ್ಟೇರ್ ಪ್ರದೇಶಗಳಲ್ಲಿ ಮಳೆಗೆ ಹಾನಿಯಾಗಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಒಟ್ಟು 76 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 20 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಈ ವರ್ಷ ಸಮೀಕ್ಷೆ ಬಳಿಕ ಪರಿಹಾರ ನೀಡಲಾಗುವುದು ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಸಂಪನ್ಮೂಲವನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರವನ್ನು ನಡೆಸಲು ಉದ್ದೇಶಿಸಲಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇಸ್ರೇಲ್ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ನೂರು ಎಕರೆ ಜಮೀನಿನಲ್ಲಿ ಬೇರೆ ಬೇರೆ ಮಾದರಿಯ ಬೆಳೆಗಳನ್ನು ಬೆಳೆಯುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಈಗಾಗಲೇ ಇಸ್ರೇಲ್‌ನ ಕಾನ್ಸುಲೇಟ್ ಅಧಿಕಾರಿಗಳನ್ನು ಆ.14ರಂದು ಕಲಬುರಗಿಗೆ ಆಹ್ವಾನಿಸಲಾಗಿದೆ. ಮೊದಲ ಹಂತದಲ್ಲಿ  ನೂರು ಎಕರೆ ಜಮೀನಿನಲ್ಲಿ ಇಸ್ರೇಲ್ ಪದ್ಧತಿಯನ್ನು ಅಳವಡಿಸಲಾಗುವುದು. ವರ್ಷದಲ್ಲಿ ಒಂದೇ ಬೆಳೆ ಬೆಳೆಯುವುದರಿಂದ ರೈತರು ಆರ್ಥಿಕವಾಗಿ ಸದೃಢವಾಗುವುದಿಲ್ಲ. ಬೇರೆ ಬೇರೆ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆದಾಯ ಬರಲಿದೆ. ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು, ಸದ್ಯ ಜಿಲ್ಲೆಯಲ್ಲಿನ ಕೋವಿಡ್ -19 ನಿಯಂತ್ರಣದ ಕುರಿತು ಹಾಗೂ ಲಸಿಕಾಕರಣ ಕುರಿತು ಕೈಗೊಂಡಿರುವ ಮಾಹಿತಿ ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು, ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಗೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಮಹಾರಾಷ್ಟç ಗಡಿ ಜಿಲ್ಲೆಯ ಆಳಂದ ಹಾಗೂ ಅಫಜಲಪುರ ತಾಲೂಕಿನ 5 ಕಡೆ ಚೆಕ್ ಪೋಸ್ಟ್ ರಚಿಸಲಾಗಿದೆ. ಜಿಲ್ಲೆಗೆ ಪ್ರವೇಶಿಸಲು 72 ಗಂಟೆಗಳ ಕೋವಿಡ್ ಆರ್‌ಟಿ-ಪಿಸಿಆರ್ ಪ್ರಮಾಣ ಪತ್ರ ಕಡ್ಡಾಯವಾಗಿ ತೋರಿಸಬೇಕು ಎಂದರು.

ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಬೇಕಾಗಿರುವ ಎಲ್ಲಾ ಅಗತ್ಯತೆಗಳಾದ ಔಷಧಿ, ಆಕ್ಸಿಜನ್, ರೆಮೆಡಿಸ್ವೀರ್ ಇಂಜೆಕ್ಷನ್ ಎಲ್ಲವೂ ಸಮರ್ಪಕವಾಗಿದೆ. ಈಗಾಗಲೇ 8.25 ಲಕ್ಷ ಕೋವಿಡ್ ಲಸಿಕೆ ನೀಡಲಾಗಿದೆ. ನಗರ ಪ್ರದೇಶದಲ್ಲಿ ಶೇ. 53ರಷ್ಟು ಜನರಿಗೆ ಕೋವಿಡ್ ಲಸಿಕಾಕರಣ ಮಾಡಲಾಗಿದೆ. ಈ ಪೈಕಿ 7 ಲಕ್ಷ ಜನರಿಗೆ ಮೊದಲ ಡೋಸ್ ಲಸಿಕೆ ಈಗಾಗಲೇ ನೀಡಲಾಗಿದೆ. ಪ್ರತಿದಿನ 3 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ನಗರದ ಜಿಮ್ಸ್ ಆಸ್ಪತ್ರೆಯಲ್ಲಿ 500 ಎಲ್‌ಪಿಎಂ  ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಕಾರ್ಯ ನಡೆಯುತ್ತಿದ್ದು ಶೀಘ್ರವೇ ಕಾರ್ಯರಂಭಿಸಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ತಾಲ್ಲೂಕು ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುವುದು, ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಬಿಗಿ ಮಾಡುವುದು, ಲಸಿಕೆ ಪ್ರಮಾಣ ಹೆಚ್ಚಿಸುವುದು ಸೇರಿದಂತೆ ಜಿಲ್ಲಾಡಳಿತ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಕಲಬುರಗಿ ಜಿಲ್ಲೆಯು ರಾಜ್ಯದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ಹಾಕಿಸಿದ ಜಿಲ್ಲೆಯಾಗಬೇಕು. ಇದಕ್ಕೆ ಅಧಿಕಾರಿಗಳ ಪರಿಶ್ರಮವಹಿಸಬೇಕು ಎಂದು ಕರೆ ನೀಡಿದರು

ಮುಂದಿನ ಮೂರು ದಶಕದಗೊಳಗೆ ಕಲಬುರಗಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ  ಸರ್ವಾಂಗೀಣ ಅಭಿವೃದ್ಧಿಪಡಿಸುವ ಸಂಬAಧ ಜಾರಿಗೊಳಿಸಲು ಉದ್ದೇಶಿಸಿರುವ " ಕಲಬುರಗಿ ವಿಷನ್ -2050" ಅನುಷ್ಠಾನಕ್ಕಾಗಿ ಇದೇ 14ರಂದು ಪರಿಣಿತರ ಮಹತ್ವ ಕಾರ್ಯಾಗಾರ ಕರೆಯಲಾಗಿದೆ. ಇದೇ 14ರಂದು ನಡೆಯುವ ಕಲಬುರಗಿ ವಿಷನ್-2050 ಕುರಿತ ಕಾರ್ಯಾಗಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ನಿವೃತ್ತ ಐಎಎಸ್, ಐಪಿಎಸ್, ಕೆಎಎಸ್, ಕೃಷಿ, ಕೈಗಾರಿಕೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲೂ ಅನುಭವ ಪಡೆದಿರುವ ನಿವೃತ್ತ ಅಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕೆAದು ಅವರು ಮನವಿ ಮಾಡಿದರು.

ಕಲಬುರಗಿ ಜಿಲ್ಲೆಯ ಶಹಬಾದ್ ನಲ್ಲಿ ಪುನರ್ ನವೀಕರಣಗೊಂಡಿರುವ ಇಎಸ್‌ಐ ಆಸ್ಪತ್ರೆಯನ್ನು ಆಗಸ್ಟ್ 15 ರಂದು ಉದ್ಘಾಟಿಸಲಾಗುವುದು. ಇದರಿಂದ ಜಿಲ್ಲೆಯ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿಷನ್ - 2050 ಕುರಿತ ಪ್ರಬಂಧ ಸ್ಪರ್ಧೆ :ನಮ್ಮ ಕನಸಿನ ಕಲಬುರಗಿ ಕುರಿತಾಗಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ ಮುಂದಿನ ಮೂರು ದಶಕದಲ್ಲಿ ಜಿಲ್ಲೆಯಲ್ಲಿ ಯಾವ ರೀತಿ ಇರಬೇಕು ಎಂಬುದನ್ನು ಸಲಹಾ ರೂಪದಲ್ಲಿ ಇರಬೇಕು. ವಿದ್ಯಾರ್ಥಿಗಳು , ಶಿಕ್ಷಕರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕೈಗಾರಿಕೆ, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಜಿಲ್ಲೆ ಹೇಗಿರಬೇಕೆಂಬುದನ್ನು ಪ್ರಬಂಧದಲ್ಲಿ ಅಭಿಪ್ರಾಯವನ್ನು ಹಂಚಿಕೊಳ್ಳಬಹುದೆಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಿದ್ಧಪಡಿಸಿದ ಪ್ರಬಂಧವನ್ನು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಗ್ರಹಿಸಿಕೊಳ್ಳಬೇಕು. ಬಳಿಕ ಇದನ್ನು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಡಿಡಿಪಿಐ)ರಿಗೆ ಸಲ್ಲಿಸಬೇಕು. ನಂತರ ಅವರು ಸಿಇಒಗಳಿಗೆ ಕಳುಹಿಸಬೇಕು. ಉತ್ತಮವಾಗಿ ಯಾರು ಬರೆದಿರುತ್ತಾರೋ ಅವರಿಗೆ ಬಹುಮಾನ ನೀಡುವುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಚಾರ್ಜ್, ಜಿಲ್ಲಾ ಪಂಚಾಯತ್ ಸಿಇಓ ಡಾ. ದಿಲೀಷ್ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಶಂಕರ ವಾಣಿಕ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಗಳು ಉಪಸ್ಥಿತರಿದ್ದರು.