News

ಗ್ರಾಮ ಪಂಚಾಯತಿ ಮಟ್ಟದಲ್ಲಿಯೆ ಅಸಂಘಟಿತ ಕಾರ್ಮಿಕರಿಗೆ 2000 ರೂ.ಗಳ ಪರಿಹಾರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ-ವಿ.ವಿ ಜೋತ್ಸ್ನಾ

16 June, 2021 9:13 AM IST By:
Application

ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2000 ರೂ. ಆರ್ಥಿಕ ನೆರವು ಘೋಷಿಸಿರುವ ಕಾರಣ ಜಿಲ್ಲೆಯ ಅರ್ಹ ಫಲಾನುಭವಿಗಳು ಇದರ ಹೆಚ್ಚಿನ ಲಾಭ ಪಡೆದುಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿಯೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಝೂಮ್ ಮೀಟ್ ಮೂಲಕ ಕಾರ್ಮಿಕ ಇಲಾಖೆ ಸೇರಿದಂತೆ ಭಾಗಿದಾರರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಈ ಸಂಬAಧ ಗ್ರಾಮ ಪಂಚಾಯತಿ ಕಚೇರಿಯಲ್ಲಿರುವ ಡಾಟಾ ಎಂಟ್ರಿ ಆಪರೇಟರ್ ಸೇವೆ ಪಡೆಯಬೇಕು. ಸಾಮಾನ್ಯ ಸೇವಾ ಕೇಂದ್ರದ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿರುವುದರಿಂದ ಈ ಸೇವೆಯನ್ನು ಗ್ರಾಮ ಪಂಚಾಯತಿಯಲ್ಲಿಯೆ ಒದಗಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ದಿಲೀಷ್ ಶಶಿ ಅವರು ಅಗತ್ಯ ಕ್ರಮ ವಹಿಸಬೇಕು ಎಂದರು.

ಲಾಕ್ ಡೌನ್ ಪರಿಹಾರ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ದೊರಕುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಈ ಕುರಿತು ಟ್ರೇಡ್ ಯೂನಿಯನ್, ಕಾರ್ಮಿಕ ಸಂಘಟನೆಗಳ ಸಹಕಾರ ಪಡೆದು ಜಿಲ್ಲೆಯಾದ್ಯಂತ ಹೆಚ್ಚಿನ ಜಾಗೃತಿ ಮೂಡಿಸುವುದಲ್ಲದೆ ಕಾರ್ಮಿಕ ವರ್ಗ ಹೆಚ್ಚಿರುವ ಪ್ರದೇಶದಲ್ಲಿ ಕ್ಯಾಂಪ್ ಆಯೋಜಿಸಿ ಸ್ಥಳದಲ್ಲಿಯೆ ಅರ್ಜಿ ಪಡೆಯಬೇಕು. ನಗರ-ಪಟ್ಟಣ ಪ್ರದೇಶದಲ್ಲಿ ಕಾರ್ಮಿಕರು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳು ಕಾರ್ಯೋನ್ಮುಖರಾಗಬೇಕು ಎಂದು ಡಿ.ಸಿ. ಅವರು ಅಧಿಕಾರಿಗಳಿಗೆ ತಿಳಿಸಿದರು.

ಅಸಂಘಟಿಕ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರಿಗೆ ಒಂದು ಬಾರಿ ಪರಿಹಾರವಾಗಿ 2000 ರೂ. ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. 18 ರಿಂದ 65 ವಯೋಮಾನದ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಕುಟುಂಬದ ಪೈಕಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರು. ಉದ್ಯೋಗ ಪ್ರಮಾಣ ಪತ್ರ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಗಳನ್ನು ಸೇವಾ ಸಿಂಧು ಮೂಲಕ ಜುಲೈ 20 ರೊಳಗೆ  ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಸಾಮಾನ್ಯ ಸೇವಾ ಕೇಂದ್ರದಲ್ಲಿ ಅರ್ಜಿ ಹಾಕಲು ನಿಗದಿಕ್ಕಿಂತ ಹೆಚ್ಚಿನ ಹಣ ಪಡೆಯುತ್ತಾರೆ ಎಂಬ ಸಾಮಾನ್ಯ ಆರೋಪವಿದ್ದು, ಈ ಸಂಬಂಧ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಕಾರ್ಮಿಕರಿಗೆ ವೃತ್ತಿ ಪ್ರಮಾಣ ಪತ್ರ ನೀಡಲು ಪಾಲಿಕೆ, ಸ್ಥಳೀಯ ಪೌರ ಸಂಸ್ಥೆ, ತಹಶೀಲ್ದಾರ-ಉಪ ತಹಶೀಲ್ದಾರ, ಪಿ.ಡಿ.ಓ, ಕಾರ್ಯದರ್ಶಿ, ಪರಿಸರ ಮಾಲಿನ್ಯ, ಕಾರ್ಮಿಕ ಇಲಾಖೆಯ ವಿವಿಧ ಹಂತದ ಅಧಿಕಾರಿಗಳಲ್ಲದೆ ಪತ್ರಾಂತಿಕ ಅಧಿಕಾರಿಗಳಿಗೂ ಅಧಿಕಾರ ನೀಡಿದ್ದು, ಕಾರ್ಮಿಕರು ಪ್ರಮಾಣ ಪತ್ರ ಕೇಳಿಬಂದಲ್ಲಿ ಆದ್ಯತೆ ಮೇಲೆ ಪ್ರಮಾಣ ಪತ್ರ  ನೀಡಬೇಕು ಎಂದು ಡಿ.ಸಿ. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಲಬುರಗಿ ಪ್ರಾದೇಶಿಕ ವಿಭಾಗದ ಕಾರ್ಮಿಕ ಉಪ ಆಯುಕ್ತ ಡಿ.ಜಿ.ನಾಗೇಶ್ ಅವರು ಮಾತನಾಡಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಣಿಯಾದ 7000 ಫಲಾನುಭವಿಗಳು ಹೊರತುಪಡಿಸಿ ಜಿಲ್ಲೆಯಲ್ಲಿ ಪರಿಹಾರಕ್ಕೆ ಇದೂವರೆಗೆ 13323 ಅರ್ಜಿಗಳು ಬಂದಿವೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿದ ಕೂಡಲೆ ಕಾರ್ಮಿಕ ಅಧಿಕಾರಿಗಳ ಲಾಗಿನ್ ಗೆ ಬಂದು  ಅಲ್ಲಿಂದ ವಿಲೇವಾರಿ ಮಾಡಲಾಗುತ್ತದೆ ಎಂದು ಸಂಪೂರ್ಣ ಪರಿಹಾರ ವಿತರಣೆ ಪ್ರಕ್ರಿಯೆ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ. ದಿಲೀಷ್ ಶಶಿ, ಡಿ.ಯು.ಡಿ.ಸಿ. ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಸಂಗಾ, ಸಹಾಯಕ ಕಾರ್ಮಿಕ ಆಯುಕ್ತೆ ಆರತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.